ಹುಕ್ಕೇರಿ: ಕೃಷಿ ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ದೊರೆಯುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ನಿಖೀಲ್ ಕತ್ತಿ ಹೇಳಿದರು.

ಹುಕ್ಕೇರಿ ಪಟ್ಟಣದಲ್ಲಿ ಕೃಷಿ ಇಲಾಖೆಯಿಂದ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿ, ವಾಡಿಕೆಗಿಂತ ಮೊದಲೇ ಈ ಭಾರಿ ಮುಂಗಾರು ಆರಂಭವಾಗಿದೆ. ರೈತರಗೆ ಅನುಕೂಲ ಆಗುವ ದೃಷ್ಟಿಯಿಂದ ಹುಕ್ಕೇರಿ ಪಟ್ಟಣದ ಸೇರಿದಂತೆ ತಾಲ್ಲೂಕಿನಲ್ಲಿ ಮೂರು ರೈತ ಸಂಪರ್ಕ ಕೇಂದ್ರ ಹಾಗೂ 37 ಪಿಕೆಪಿಎಸ್ ಗಳು ಸೇರಿ ಒಟ್ಟು 40 ಬೀಜ ವಿತರಣಾ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಸರಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ದೊರೆಯುತ್ತಿದ್ದು ರೈತರು ಇದರ ಸದುಪಯೋಗ ಪಡೆಯಬೇಕು ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಆರ್ ಬಿ ನಾಯ್ಕರ್ ಮಾತನಾಡಿ, ತಾಲ್ಲೂಕಿನ 40 ಕೇಂದ್ರಗಳಿಂದ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಇಗಾಗಲೇ 5600 ಕ್ವಿಂಟಾಲ್ ಸೋಯಾಬೀನ, 78 ಕ್ವಿಂಟಾಲ್ ಮೆಕ್ಕೆಜೋಳ, 7.56 ಕ್ವಿಂಟಾಲ್ ಜೋಳ, 6.6 ಕ್ವಿಂಟಾಲ್ ಹೆಸರು ಬಿತ್ತನೆ ಬೀಜಗಳು ದಾಸ್ತಾನು ಮಾಡಲಾಗಿದೆ. ರಸಗೊಬ್ಬರವು ಕೂಡ ಸಾಕಷ್ಟು ದಾಸ್ತಾನು ಮಾಡಲಾಗಿದ್ದು, ಎಲ್ಲ ಖಾಸಗಿ ಮಾರಾಟಗಾರರು ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯತಿ ದರದಲ್ಲಿ ದೊರೆಯುತ್ತದೆ.
ರೈತರು ಅಧಿಕೃತ ಮಾರಾಟಗಾರರಲ್ಲಿ ಮಾತ್ರ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪಡೆದು ನಿಗದಿತ ದರದ ಬಿಲ್ ಪಡೆಯಬೇಕು. ಒಂದು ವೇಳೆ ಯಾರಾದರೂ ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು

.ಈ ಸಂಧರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷ ಎ ಕೆ ಪಾಟೀಲ, ಹಿರಿಯ ಸದಸ್ಯ ಮಹಾವೀರ ನಿಲಜಗಿ, ಮುಖಂಡರಾದ ಸತ್ಯಪ್ಪ ನಾಯಿಕ, ಗುರು ಕುಲಕರ್ಣಿ, ಶಿವಗೌಡ ಪಾಟೀಲ, ರಾಚಯ್ಯ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.